ಬೆಳ್ಳಂಬೆಳಗ್ಗೆಯೇ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ


ಗಳೂರು, ಜನವರಿ 8: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ದಾಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್‌ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಅಲ್ಲದೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ ಜಿಲ್ಲೆಯ ಹಲವೆಡೆ ದಾಳಿ

ಗದಗ ಜಿಲ್ಲೆಯ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಗದಗ-ಬೆಟಗೇರಿ ನಗರಸಭೆ ಇಂಜಿಯರ್​​​​ ಕಚೇರಿ, ಮನೆಗಳ ಮೇಲೆ, ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಮನೆ, ಕಚೇರಿ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಈ ಕ್ರಮ ಕೈಗೊಂಡಿದೆ.

ಬಳ್ಳಾರಿಯಲ್ಲೂ ಲೋಕಾ ರೇಡ್

ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹಲವೆಡೆ ಶೋಧ

ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್​ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ನಗರದ ಲಕ್ಷ್ಮೀಟೆಕ್​ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಎಸ್‌ಪಿ ಹನುಮಂತರಾಯಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ತುಮಕೂರು ಆರ್​​ಟಿಒದಲ್ಲಿ ಕಾರ್ಯನಿರ್ವಹಿಸಿ‌ ನಿವೃತ್ತಿ ಹೊಂದಿರುವ ಎಸ್ ರಾಜು ಮನೆ ಮೇಲೆ‌ ದಾಳಿ ನಡೆದಿದೆ. ಎಸ್ ರಾಜು ಕಳೆದ ವರ್ಷ ನಿವೃತ್ತಿ ಹೊಂದಿದ್ದರು.

Next Post Previous Post
ಜಾಹೀರಾತು

Advertisement

Advertisement

```

Advertisement

Advertisement