BREAKING: ಒಂದು ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸ್ವತಃ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮುಂದಿನ ತಿಂಗಳು 20ನೇ ತಾರೀಖಿಗೆ ನಮ್ಮ ಸರಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಅವರು ಹೇಳಿದರು.
ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರಚನಾತ್ಮಕ ಟೀಕೆ ಮಾಡುವ ಬದಲು ಕೇವಲ ಸುಳ್ಳನ್ನೇ ಹೇಳುತ್ತ, ಒಂದೇ ಸುಳ್ಳನ್ನು 10 ಬಾರಿ ಹೇಳುವ ಮೂಲಕ ಅದೇ ಸತ್ಯ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನರು ಮೂರ್ಖರಲ್ಲ, ಇವರ ಬಂಡವಾಳ ಗೊತ್ತಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.